ಅಹಮದಾಬಾದ್: ಲಂಡನ್ಗೆ ಪ್ರಯಾಣಿಸುತ್ತಿದ್ದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಏರ್ ಇಂಡಿಯಾ ವಿಮಾನ ದುರಂತದಲ್ಲಿ ದುರ್ಮರಣ ಹೊಂದಿದ್ದಾರೆ. 12ನೇ ಸೀಟಿನಲ್ಲಿ ಕುಳಿತುಕೊಂಡಿದ್ದ ರೂಪಾನಿ, ಲಂಡನ್ನಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದ ವೇಳೆ ಈ ಭೀಕರ ಘಟನೆ ಸಂಭವಿಸಿದೆ.
ವಿಮಾನದಲ್ಲಿ ಇಬ್ಬರು ಪೈಲಟ್ಗಳು, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಇದ್ದರು. ಈವರೆಗೆ 130ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ರಕ್ಷಣಾ ಸಿಬ್ಬಂದಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.
ವಿಮಾನ ಪತನಗೊಂಡಿರುವ ಸ್ಥಳ ಮೇಘಾನಿ ಪ್ರದೇಶದ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಆಗಿದ್ದು, ಅಡುಗೆ ಮನೆ ಮೇಲೆ ಬಿದ್ದು ಅಪಾರ ಹಾನಿ ಉಂಟಾಗಿದೆ. ಮಧ್ಯಾಹ್ನ ಊಟದ ಸಮಯವಾಗಿದ್ದರಿಂದ ಹಲವಾರು ವಿದ್ಯಾರ್ಥಿಗಳು ಹಾಸ್ಟೆಲ್ನೊಳಗೆ ಇದ್ದರು. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಂಭವವಿದೆ.
ಘಟನೆಯ ನಂತರ ಭಾರೀ ಬೆಂಕಿ ಹರಡಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಹಲವರು ಗುರುತಿಸಲಾಗದೆ ಇದ್ದು, ಡಿಎನ್ಎ ಪರೀಕ್ಷೆಗೆ ಪರಿಗಣನೆ ನಡೆಯುತ್ತಿದೆ.ಇದನ್ನು ಓದಿ –ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನ: 110 ಪ್ರಯಾಣಿಕರ ದುರ್ಮರಣ
ಈ ಭೀಕರ ದುರಂತವು ರಾಷ್ಟ್ರದಾದ್ಯಂತ ಶೋಕದಛಾಯೆ ಮೂಡಿಸಿದ್ದು, ಪ್ರಧಾನಮಂತ್ರಿ, ಗೃಹಸಚಿವರು ಸೇರಿದಂತೆ ಅನೇಕ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.