ಚಿಕ್ಕಮಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಕೋರ್ಟ್ ಆದೇಶದಂತೆ ಟಿ.ಡಿ. ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದ್ದು, ಇದರ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಗೌಡ, ಅವರ ಪತ್ನಿ ಪುಷ್ಪ ಮತ್ತು ಮಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಟಿ.ಡಿ. ರಾಜೇಗೌಡ ಈಗಾಗಲೇ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್ನಲ್ಲಿ ತಮ್ಮ ಆಸ್ತಿಯನ್ನು ಸಂಪೂರ್ಣವಾಗಿ ಘೋಷಿಸಿಲ್ಲ ಎಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ದಿನೇಶ್ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಸೂಚನೆಯ ಮೇರೆಗೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಎಫ್ಐಆರ್ ದಾಖಲಾದ ನಂತರ ಲೋಕಾಯುಕ್ತ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.ಇದನ್ನು ಓದಿ –ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸಿದರೆ ವಂಚನೆ ಕೇಸ್ ದಾಖಲು
ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ಬಸಾಪುರದಲ್ಲಿರುವ ರಾಜೇಗೌಡರ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ.








