ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಬಿ.ಇಡಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಹಿನ್ನೆಲೆ ಏಕವ್ಯಕ್ತಿ ಸತ್ಯಶೋಧನಾ ಸಮಿತಿ ತನಿಖೆ ನಡೆಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ಬಿ.ಜಿ. ಪಾಟೀಲ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಬಿ.ಇಡಿ 2ನೇ ಮತ್ತು 4ನೇ ಸೆಮಿಸ್ಟರ್ ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿರುವುದು ಪತ್ತೆಯಾದ ನಂತರ, ಫಲಿತಾಂಶ ವಿಳಂಬದಿಂದ ವಿದ್ಯಾರ್ಥಿಗಳಿಗೆ ಉಂಟಾಗಿರುವ ತೊಂದರೆಯನ್ನು ನಿವಾರಿಸಲು ಮರುಮೌಲ್ಯಮಾಪನಕ್ಕೆ ಗುವಿವಿ ಅನುಮತಿ ಕೋರಿರುವುದಾಗಿ ತಿಳಿಸಿದ್ದಾರೆ. ಈ ಪ್ರಸ್ತಾವ ಪ್ರಸ್ತುತ ಕಾನೂನು ಇಲಾಖೆಯ ಪರಿಶೀಲನೆಯಲ್ಲಿದೆ ಎಂದಿದ್ದಾರೆ.
ಇದನ್ನು ಓದಿ –ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ಸ್ಥಗಿತ
ಅಕ್ರಮದ ಸಂಭಾವ್ಯತೆಯ ಹಿನ್ನೆಲೆಯಲ್ಲಿ ವಿಷಯವನ್ನು ಸಿಐಡಿ ತನಿಖೆಗೆ ವಹಿಸಬೇಕೆಂದು ವಿಶ್ವವಿದ್ಯಾಲಯವು ಇಲಾಖೆ ಬಳಿ ಮನವಿ ಮಾಡಿತ್ತು. ಬಳಿಕ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಜ್ಯಪಾಲರು ಏಕವ್ಯಕ್ತಿ ಸತ್ಯಶೋಧನಾ ಸಮಿತಿ ರಚಿಸಿದ್ದು, ತನಿಖಾ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.








