ದಾವಣಗೆರೆ: ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರ ಇಂದು ಸಂಜೆ ದಾವಣಗೆರೆ ಹೊರವಲಯದ ಕಲ್ಲೇಶ್ವರ ರೈಸ್ ಮಿಲ್ನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಅವರ ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಯಲು ಸಿದ್ಧತೆಗಳನ್ನು ಮಾಡಲಾಗಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಿಂದ ಮಧ್ಯರಾತ್ರಿ ಹೊರಟ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಸುಮಾರು 4 ಗಂಟೆಗೆ ದಾವಣಗೆರೆಗೆ ತಲುಪಿತು. ಮೊದಲಿಗೆ ಹಿರಿಯ ಪುತ್ರ ಎಸ್.ಎಸ್. ಬಕ್ಕೇಶ್ ಅವರ ನಿವಾಸಕ್ಕೆ, ನಂತರ ಎಸ್.ಎಸ್. ಗಣೇಶ್ ಅವರ ಮನೆಗೆ ಹಾಗೂ ಮೂರನೇ ಪುತ್ರ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ಮೃತದೇಹವನ್ನು ಕರೆದೊಯ್ಯಲಾಯಿತು. ಈ ಮೂರು ಮನೆಗಳಲ್ಲಿಯೂ ಕಣ್ವೆಕುಪ್ಪೆ ಶ್ರೀಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.
ವಿಧಿ ವಿಧಾನಗಳ ನಂತರ ಶಾಮನೂರು ಶಿವಶಂಕರಪ್ಪ ಅವರ ನಿವಾಸದ ಮುಂಭಾಗ ಸಾರ್ವಜನಿಕ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅನೇಕ ಗಣ್ಯರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
ಸಾರ್ವಜನಿಕ ದರ್ಶನ ಮುಗಿದ ಬಳಿಕ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಅಂತಿಮಯಾತ್ರೆ ಮೆರವಣಿಗೆ ಆರಂಭವಾಗಲಿದೆ. ಹೈಸ್ಕೂಲ್ ಮೈದಾನದಿಂದ ಹೊರಡುವ ಮೆರವಣಿಗೆ ಹಳೆಯ ಕೋರ್ಟ್ ಮೈದಾನ, ಎಸಿ ಕ್ರಾಸ್, ರೇಣುಕಾ ಮಂದಿರ ಸರ್ಕಲ್, ಅರುಣ ಸರ್ಕಲ್, ಹೊಂಡದ ಸರ್ಕಲ್, ದುರ್ಗಾಂಬಿಕ ದೇವಸ್ಥಾನ, ಹಗೆದಿಬ್ಬ ಸರ್ಕಲ್, ಕಾಳಿಕಾಂಬ ದೇವಸ್ಥಾನ ರಸ್ತೆ, ಗ್ಯಾಸ್ ಕಟ್ಟೆ ಸರ್ಕಲ್, ಬಕ್ಕೇಶ್ವರ ದೇವಸ್ಥಾನ ಮುಂಭಾಗ, ಹಾಸಭಾವಿ ಸರ್ಕಲ್, ಗಣೇಶ ದೇವಸ್ಥಾನ, ಅರಳಿ ಮರ ಸರ್ಕಲ್ ಹಾಗೂ ವೆಂಕಟೇಶ್ವರ ಸರ್ಕಲ್ ಮೂಲಕ ಸಾಗುತ್ತಾ ಕಲ್ಲೇಶ್ವರ ರೈಸ್ ಮಿಲ್ಗೆ ತಲುಪಲಿದೆ.
ದಾವಣಗೆರೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶಾಮನೂರು ಶಿವಶಂಕರಪ್ಪ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ನಗರದಲ್ಲಿ ದೀರ್ಘ ಮೆರವಣಿಗೆ ನಡೆಸಬೇಕೆಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಒತ್ತಾಯಿಸಿದ್ದರು. ಅವರ ಮನವಿಗೆ ಸ್ಪಂದಿಸಿ ಸುಮಾರು 15 ಕಿ.ಮೀ ದೂರದ ಅಂತಿಮಯಾತ್ರೆ ಮೆರವಣಿಗೆ ಆಯೋಜಿಸಲಾಗಿದ್ದು, ಸಂಜೆ ಸುಮಾರು 6 ಗಂಟೆಯ ವೇಳೆಗೆ ಅಂತ್ಯಸಂಸ್ಕಾರ ನಡೆಯಲಿದೆ.








