- ನಾಲ್ಕು ನಿಗಮಗಳಿಗೆ 4,006.47 ಕೋಟಿ ರೂ. ಬಾಕಿ
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ 134 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಜನರಿಗೆ ನೀಡಿದ್ದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಆರಂಭದಲ್ಲಿ ಜನಪ್ರಿಯತೆ ಪಡೆದ ಈ ಯೋಜನೆಗಳೇ ಇದೀಗ ರಾಜ್ಯ ಸರ್ಕಾರವನ್ನು ಆರ್ಥಿಕ ಸಂಕಷ್ಟದತ್ತ ತಳ್ಳಿವೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಚುನಾವಣೆಗೆ ಮುನ್ನ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಆದರೆ ಈ ಯೋಜನೆಗಳ ಭಾರದಿಂದ ಸರ್ಕಾರದ ಹಣಕಾಸು ಸ್ಥಿತಿ ಕುಸಿಯುತ್ತಿದೆಯೇ ಎಂಬ ಪ್ರಶ್ನೆ ಈಗ ತೀವ್ರವಾಗಿದೆ.
ಇತ್ತೀಚೆಗೆ ನಡೆದ ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷ ನಾಯಕರು ಗೃಹಲಕ್ಷ್ಮಿ ಯೋಜನೆಯ ಹಣ ಬಾಕಿ ಉಳಿಸಿಕೊಂಡಿರುವುದಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪೂರಕವಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲೇ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಾಕಿ ಉಳಿದಿರುವುದನ್ನು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದರು. ಇದರ ಬೆನ್ನಲ್ಲೇ, ಶಕ್ತಿ ಯೋಜನೆಯಲ್ಲಿಯೂ ಸಾವಿರಾರು ಕೋಟಿ ರೂಪಾಯಿ ಬಾಕಿ ಉಳಿದಿರುವುದು ದಾಖಲೆ ಸಮೇತವಾಗಿ ಬೆಳಕಿಗೆ ಬಂದಿದೆ.
ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ಒಟ್ಟು ಸುಮಾರು 4,000 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಕುರಿತು ವಿಧಾನ ಪರಿಷತ್ನಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜ್ ಅವರ ಪ್ರಶ್ನೆಗೆ ಸಾರಿಗೆ ಸಚಿವರೇ ಉತ್ತರ ನೀಡಿದ್ದಾರೆ. ಇದರಿಂದ ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆಯೇ ಎಂಬ ಪ್ರಶ್ನೆಯನ್ನು ವಿಪಕ್ಷಗಳು ಮುಂದಿಟ್ಟಿವೆ.
ಶಕ್ತಿ ಯೋಜನೆಯ ಹಣ ಬಾಕಿ ಕುರಿತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. 2023ರಿಂದ ಇಲ್ಲಿವರೆಗೆ ಶಕ್ತಿ ಯೋಜನೆಯ ಅಡಿಯಲ್ಲಿ ಸುಮಾರು 4,006 ಕೋಟಿ ರೂಪಾಯಿ ಬಾಕಿ ಉಳಿದಿದೆ ಎಂದು ಅವರು ತಿಳಿಸಿದ್ದಾರೆ.ಇದನ್ನು ಓದಿ –ಗಿರವಿ ಇಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಆರೋಪ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸೇರಿ ನಾಲ್ಕು ನಿಗಮಗಳಿಗೆ ಒಟ್ಟು 4,006.47 ಕೋಟಿ ರೂಪಾಯಿ ಬಾಕಿಯಿದೆ. 2023–24ನೇ ಸಾಲಿನಲ್ಲಿ 1,180.62 ಕೋಟಿ ರೂಪಾಯಿ, 2024–25ನೇ ಸಾಲಿನಲ್ಲಿ 1,170.45 ಕೋಟಿ ರೂಪಾಯಿ ಮತ್ತು 2025–26ನೇ ಸಾಲಿನಲ್ಲಿ ನವೆಂಬರ್ 25ರ ತನಕ 1,655.40 ಕೋಟಿ ರೂಪಾಯಿ ಬಾಕಿ ಉಳಿದಿದೆ ಎಂದು ಆರೋಪಿಸಿದ್ದಾರೆ.








