ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ, ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್ಐ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿ ಬೆಳಗ್ಗೆ ತಮ್ಮ ನಿವಾಸಕ್ಕೆ ಬಂದಿದ್ದರು. ಈ ವೇಳೆ ಏಕಾಏಕಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ನಾಗನಾಯಕ ಅವರು ನಗರದ ಪೊಲೀಸ್ ಗೃಹದಲ್ಲಿ ವಾಸವಿದ್ದು, ಮನೆಯಲ್ಲೇ ಈ ದುರ್ಘಟನೆ ಸಂಭವಿಸಿದೆ. ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆ ಹಾಗೂ ಸಹೋದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಗೋಕಾಕದ ಲಕ್ಷ್ಮೀ ದೇವಿ ಜಾತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮತ್ತೊಬ್ಬ ಎಎಸ್ಐ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ, ಪೊಲೀಸ್ ಸಿಬ್ಬಂದಿಯ ಆರೋಗ್ಯದ ಬಗ್ಗೆ ಚಿಂತನೆ ವ್ಯಕ್ತವಾಗುತ್ತಿದೆ.








