ಬೆಂಗಳೂರು: ಕಾಲೇಜು ಮುಗಿಸಿ ಹೊರಬರುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.
ಮೃತಳನ್ನು ಕೃತಿಕಾ (21) ಎಂದು ಗುರುತಿಸಲಾಗಿದೆ. ಹಿಂಬದಿಯಲ್ಲಿ ಕುಳಿತಿದ್ದ ಹಂಸ (21) ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರೂ ಎಂಬಿಬಿಎಸ್ ವಿದ್ಯಾರ್ಥಿನಿಯರಾಗಿದ್ದರು ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಇಬ್ಬರು ಆಕ್ಟೀವಾ ಸ್ಕೂಟರ್ನಲ್ಲಿ ಕಾಲೇಜು ಮುಗಿಸಿ ಗೇಟ್ನಿಂದ ಹೊರಬರುತ್ತಿದ್ದ ವೇಳೆ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಂಸ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ಹಂಸ ಅವರನ್ನು ಆರ್ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನು ಓದಿ –ನೈಸ್ ರಸ್ತೆ ದ್ವಿಚಕ್ರ ವಾಹನಗಳಿಗೆ ಟೋಲ್ ರದ್ದು ಸಾಧ್ಯತೆ
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.








