- ವ್ಯಾಪಾರಗಳಿಗೆ ಅಸಮಾಧಾನ
ಮಂಡ್ಯ: ಬೇಸಿಗೆ ರಜೆ ವೇಳೆ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಹಾಗೂ ಎಡಮುರಿ ಪ್ರವಾಸಿ ತಾಣಗಳಿಗೆ ಸರ್ಕಾರ ತಾತ್ಕಾಲಿಕ ನಿರ್ಬಂಧ ಹೇರಿದೆ. ಇತ್ತೀಚೆಗೆ ಸಂಭವಿಸಿದ ಸಾವು-ನೋವಿನ ಘಟನೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಪ್ರದೇಶಕ್ಕೆ ಭೇಟಿ ನೀಡುವ ಪ್ರವಾಸಿಗರು ಕಾವೇರಿ ನದಿಯಲ್ಲಿ ಇಳಿದು ಮೋಜು-ಮಸ್ತಿ ಮಾಡುವ ವೇಳೆ ಸುಳಿಗೆ ಸಿಲುಕಿ ಮೃತಪಟ್ಟ ಘಟನೆಗಳು ಮರುಮರು ಸಂಭವಿಸುತ್ತಿವೆ. 2015ರಿಂದ ಇಂದಿನವರೆಗೆ ಸುಮಾರು 79 ಮಂದಿ ಇಲ್ಲಿ ಸಾವನ್ನಪ್ಪಿದ್ದು, ಕಳೆದ ಒಂದು ವಾರದಲ್ಲೇ 4 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿರ್ಬಂಧದ ಪರಿಣಾಮವಾಗಿ ಸ್ಥಳೀಯ ಅಂಗಡಿಗಳು ಮತ್ತು ವ್ಯಾಪಾರ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಪ್ರವಾಸಿಗರನ್ನೇ ಅವಲಂಬಿಸಿಕೊಂಡು ಬದುಕು ಕಟ್ಟಿಕೊಂಡಿದ್ದ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪ್ರವಾಸಿಗರ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕಿತ್ತು, ಸಂಪೂರ್ಣ ನಿರ್ಬಂಧ ಹೇರಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.



