- ರಾಜ್ಯ ಸರ್ಕಾರ ಅಧಿಸೂಚನೆ
ಬೆಂಗಳೂರು: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಹಾಸನ, ಉತ್ತರ ಕನ್ನಡ, ಯಾದಗಿರಿ, ಬೀದರ್ ಹಾಗೂ ಕೊಪ್ಪಳ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿ ಗುರುತು ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಹೊಸ ಅಧಿಸೂಚನೆ ಹೊರಡಿಸಿದೆ.
ಹಿಂದೆ ಹೊರಡಿಸಿದ್ದ ಅಧಿಸೂಚನೆಯ ಬಳಿಕ ನಡೆದ ಆಡಳಿತಾತ್ಮಕ ಬದಲಾವಣೆಗಳು ಹಾಗೂ ಕೆಲವು ಗ್ರಾಮೀಣ ಪ್ರದೇಶಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿಸಿರುವ ಹಿನ್ನೆಲೆ ಕ್ಷೇತ್ರಗಳ ಮರು ವಿಂಗಡಣೆ ಮಾಡಲಾಗಿದೆ.
ಕಂದಾಯ ಇಲಾಖೆಯು ಮಾಗಡಿ ಮತ್ತು ನೆಲಮಂಗಲ ತಾಲ್ಲೂಕುಗಳ ಭೌಗೋಳಿಕ ಗಡಿಗಳನ್ನು ಪುನರ್ ರಚಿಸಿದ್ದರಿಂದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿಗಳನ್ನು ಮತ್ತೆ ಪರಿಷ್ಕರಿಸುವುದು ಅನಿವಾರ್ಯವಾಗಿದೆ.
ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಕ್ಷೇತ್ರಗಳ ಗಡಿಗಳನ್ನು ಮರುನಿಗದಿಪಡಿಸಲಾಗಿದ್ದು, ಹಳೆಯ ಅಧಿಸೂಚನೆಗಳನ್ನು ಹಿಂಪಡೆದು ಹೊಸ ಕ್ರಮಸಂಖ್ಯೆಗಳೊಂದಿಗೆ ಕ್ಷೇತ್ರಗಳ ಹೆಸರು ಹಾಗೂ ವ್ಯಾಪ್ತಿಯನ್ನು ಪ್ರಕಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 28 ಏಕ ಸದಸ್ಯ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಇದರಲ್ಲಿ ಹೊಸಕೋಟೆ 8, ದೇವನಹಳ್ಳಿ 7, ದೊಡ್ಡಬಳ್ಳಾಪುರ 7 ಹಾಗೂ ನೆಲಮಂಗಲ 6 ಕ್ಷೇತ್ರಗಳು ಸೇರಿವೆ.
ಮೇ 5ರಂದು ಅದಾಲತ್
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ 5.30ರವರೆಗೆ ವಿಸ್ತರಿಸಿದೆ.
ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಸದಸ್ಯರ ಸಂಖ್ಯೆಗೆ ಸಂಬಂಧಿಸಿದ ಆಕ್ಷೇಪಣೆ ಹಾಗೂ ಅಹವಾಲುಗಳ ಪರಿಶೀಲನೆಗಾಗಿ ನಿಗದಿಯಾಗಿದ್ದ ಅದಾಲತ್ತನ್ನು ಏಪ್ರಿಲ್ 27ರಿಂದ ಮೇ 5ಕ್ಕೆ ಮುಂದೂಡಲಾಗಿದೆ.
ಅಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಚೇರಿಯಲ್ಲಿ ಅದಾಲತ್ ನಡೆಯಲಿದೆ.
ಬೆಳಿಗ್ಗೆ 11ರಿಂದ 1.30ರವರೆಗೆ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿಚಾರಣೆ ನಡೆಯಲಿದೆ.ಇದನ್ನು ಓದಿ –ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯ
ಮಧ್ಯಾಹ್ನ 2.30ರಿಂದ 5ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ತುಮಕೂರು, ದಾವಣಗೆರೆ, ಕೋಲಾರ, ಚಿತ್ರದುರ್ಗ, ಶಿವಮೊಗ್ಗ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳ ಅದಾಲತ್ ನಡೆಯಲಿದೆ.








