ಕುಮಾವೂನ್: ಉತ್ತರಾಖಂಡದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಭಾರೀ ಮಳೆ ಸುರಿದ ಪರಿಣಾಮ ಭೂಕುಸಿತ ಉಂಟಾಗಿ ಕನಿಷ್ಠ 6 ಮಂದಿ ಮೃತಪಟ್ಟಿದ್ದು, 11 ಮಂದಿ ನಾಪತ್ತೆಯಾಗಿದ್ದಾರೆ. ಹಲವು ಮನೆಗಳು ಹಾನಿಗೊಳಗಾಗಿದ್ದು, ಅನೇಕರು ಅವಶೇಷಗಳಡಿಯಲ್ಲಿ ಸಿಲುಕಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶುಕ್ರವಾರ ಮುಂಜಾನೆ ಸುರಿದ ಅತಿಯಾದ ಮಳೆಯಿಂದ ಬಾಗೇಶ್ವರ ಜಿಲ್ಲೆಯ ಕಪ್ಕೋಟ್ ಪ್ರದೇಶದ ಪೌಸಾರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 6 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಇದರಿಂದ ಇಬ್ಬರು ಸಾವನ್ನಪ್ಪಿದ್ದು, ಮೂವರು ಕಾಣೆಯಾಗಿದ್ದಾರೆ ಮತ್ತು ಒಬ್ಬರಿಗೆ ಗಾಯವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಚಮೋಲಿ ಜಿಲ್ಲೆಯ ಮೊಪಾಟಾ ಗ್ರಾಮದಲ್ಲೂ ಭೂಕುಸಿತದಿಂದ ಮನೆ ಹಾಗೂ ದನದ ಕೊಟ್ಟಿಗೆ ಕುಸಿದು ಬಿದ್ದಿದ್ದು, ದಂಪತಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. ರುದ್ರಪ್ರಯಾಗ ಜಿಲ್ಲೆಯ ಬಸುಕೆದಾರ್ ಪ್ರದೇಶದಲ್ಲಿ ನಿರಂತರ ಮಳೆ ಹಾಗೂ ಭೂಕುಸಿತಗಳಿಂದ 6ಕ್ಕೂ ಹೆಚ್ಚು ಗ್ರಾಮಗಳು ಹಾನಿಗೊಳಗಾಗಿವೆ. ಇಲ್ಲಿ ಇಬ್ಬರು ಮೃತಪಟ್ಟಿದ್ದು, 8 ಮಂದಿ ನಾಪತ್ತೆಯಾಗಿದ್ದಾರೆ.
ಇನ್ನೂ ಡೆಹ್ರಾಡೂನ್ನ ಬಿಂದಾಲ್ ನದಿಯಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಭಾರೀ ಮಳೆ ಹಾಗೂ ಭೂಕುಸಿತದಿಂದ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ರುದ್ರಪ್ರಯಾಗ ಜಿಲ್ಲೆಯ ಸಿರೋಬ್ಗಢ ಪ್ರದೇಶದಲ್ಲಿಯೂ ಬದ್ರಿನಾಥ್ ಹೆದ್ದಾರಿ ಮುಚ್ಚಲ್ಪಟ್ಟಿದೆ.ಇದನ್ನು ಓದಿ –10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಾನಗರ ಪಾಲಿಕೆ ಅಧಿಕಾರಿ
ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಯಾತ್ರಿಕರು ರಸ್ತೆ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಬಳಿಕ ಮಾತ್ರ ಪ್ರಯಾಣ ಆರಂಭಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.