ಬೆಂಗಳೂರು: ಗ್ರಾಹಕರಿಗೆ ಮೋಸ ಮಾಡಿ ಗೃಹೋಪಯೋಗಿ ವಸ್ತುಗಳು ಹಾಗೂ ಸೇವೆಗಳನ್ನು ಮಾರಾಟ ಮಾಡುತ್ತಿದ್ದ ಕಂಪನಿಗಳ ವಿರುದ್ಧ ಬೆಂಗಳೂರು ವ್ಯಾಪ್ತಿಯಲ್ಲಿ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಒಟ್ಟು 2,334 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 2,250 ಪ್ರಕರಣಗಳನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಉತ್ತರ ನೀಡಿದರು. ಗ್ರಾಹಕರು ವಸ್ತು ಖರೀದಿ ಅಥವಾ ಸೇವೆ ಪಡೆಯುವ ಸಂದರ್ಭದಲ್ಲಿ ವಂಚನೆಗೆ ಒಳಗಾದರೆ, ಗ್ರಾಹಕ ಸಂರಕ್ಷಣಾ ಕಾಯ್ದೆ–2019ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಪರಿಹಾರ ಪಡೆಯುವ ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.
ಇದಲ್ಲದೆ, ಹೋಟೆಲ್ಗಳಲ್ಲಿ ಪ್ಯಾಕೇಜ್ ತಿಂಡಿ ತಿನಿಸುಗಳು ಹಾಗೂ ನೀರಿನ ಬಾಟಲ್ಗಳ ಮೇಲೆ ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಪ್ರಕರಣಗಳಿಗೂ ಕ್ರಮ ಕೈಗೊಳ್ಳಲಾಗುತ್ತಿದೆ.ಇದನ್ನು ಓದಿ – ಮೊಟ್ಟೆಗಳಲ್ಲಿ ‘ನೈಟ್ರೋಫ್ಯೂರಾನ್’ ಅವಶೇಷಗಳ ಶಂಕೆ
ಪೊಟ್ಟಣ ಸಾಮಗ್ರಿ ನಿಯಮ–2011ರ ಉಲ್ಲಂಘನೆ ಸಂಬಂಧ ಹೋಟೆಲ್ಗಳ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆ ತಪಾಸಣೆ ನಡೆಸಿ, ನಿಯಮಾನುಸಾರ ಅಭಿಸಂಧಾನ ಶುಲ್ಕ ವಿಧಿಸಲಾಗುತ್ತಿದೆ. ಅಭಿಸಂಧಾನಕ್ಕೆ ಒಪ್ಪದ ಹೋಟೆಲ್ಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.








