- ರಾಜ್ಯ ರಾಜಕೀಯಕ್ಕೆ ದೊಡ್ಡ ನಷ್ಟ
ಚಿತ್ರದುರ್ಗ: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಅವರು ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅನಾರೋಗ್ಯ ಹಿನ್ನೆಲೆ:
ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ ಶಸ್ತ್ರಚಿಕಿತ್ಸೆಯ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ನಂತರ ಅವರನ್ನು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ನಿಧನರಾದರು.
ಸಿಎಂ ಸಂತಾಪ:
ಸಚಿವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ, “ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಅವರು ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆ ಹೊಂದಿದ ನಾಯಕರು. ವೈದ್ಯರ ಪ್ರಯತ್ನಗಳ ನಡುವೆಯೂ ಅವರು ನಮ್ಮನ್ನು ಅಗಲಿರುವುದು ನೋವು ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ” ಎಂದು ತಿಳಿಸಿದ್ದಾರೆ.
ಕೌಟುಂಬಿಕ ಹಾಗೂ ರಾಜಕೀಯ ಪಯಣ:
1961 ಮಾರ್ಚ್ 28ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಗಳ ಪುತ್ರನಾಗಿ ಜನಿಸಿದ ಸುಧಾಕರ್, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದರು. ನಂತರ ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿ.ಕಾಂ ಪದವಿ ಪಡೆದಿದ್ದರು. ಕೃಷಿ ಮತ್ತು ಲಿಕ್ಕರ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಅವರು ಬಳಿಕ ರಾಜಕೀಯಕ್ಕೆ ಪ್ರವೇಶಿಸಿ ಹಂತ ಹಂತವಾಗಿ ಬೆಳೆದು ಜಿಲ್ಲೆಯ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದರು.
ವೈಯಕ್ತಿಕವಾಗಿ ಸರಳ ಸ್ವಭಾವದವರಾಗಿದ್ದ ಅವರು ಪತ್ನಿ ಹರ್ಷಿಣಿ, ಪುತ್ರ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಅವರನ್ನು ಅಗಲಿದ್ದಾರೆ. ಅವರ ನಿಧನದಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕ ವಾತಾವರಣ ನಿರ್ಮಾಣವಾಗಿದೆ.








