ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿ ಸ್ಥಳೀಯ ಜನಪ್ರತಿನಿಧಿಗಳು, ಉದ್ಯಮಿಗಳು, ಡೆವೆಲಪರ್ಗಳು ಮತ್ತು ಹೂಡಿಕೆದಾರರ ಅಭಿಪ್ರಾಯ ಪಡೆದು ಸರ್ಕಾರ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಶನಿವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಮತ್ತು ಗೋವಾದಂತೆ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವಲ್ಲಿ ಕರ್ನಾಟಕ ಹಿಂದೆ ಉಳಿದಿದೆ ಎಂದರು. ಮಂಗಳೂರಿನ ಹಲವರು ಉದ್ಯೋಗಕ್ಕಾಗಿ ಸೌದಿ, ದುಬೈ, ಯುಎಇ ಹಾಗೂ ಬೆಂಗಳೂರು ಕಡೆಗೆ ವಲಸೆ ಹೋಗುತ್ತಿದ್ದಾರೆ. ಇಲ್ಲಿ ಒಂದೂ ಪಂಚತಾರ ಹೋಟೆಲ್ ಇಲ್ಲ, ಸಮರ್ಪಕವಾಗಿ ಅಭಿವೃದ್ಧಿಗೊಂಡ ಪ್ರವಾಸಿ ತಾಣಗಳೂ ಕಡಿಮೆ. ರಾಜ್ಯದ ಸುಮಾರು 300 ಕಿ.ಮೀ. ಉದ್ದದ ಕರಾವಳಿ ತೀರದಲ್ಲಿ ಅಪಾರ ಪ್ರಕೃತಿ ಸಂಪತ್ತು ಇದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಇದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನೇತೃತ್ವದ ಸರ್ಕಾರಗಳೆರಡರ ವೈಫಲ್ಯವೂ ಕಾರಣ ಎಂದು ಅಭಿಪ್ರಾಯಪಟ್ಟರು.
ಕೇರಳ ಹಾಗೂ ಗೋವಾದಲ್ಲಿ ಪ್ರವಾಸೋದ್ಯಮ ಹೇಗೆ ಅಭಿವೃದ್ಧಿಯಾಯಿತು ಎಂಬುದನ್ನು ಅಧ್ಯಯನ ಮಾಡಿ, ನಮ್ಮಲ್ಲಿರುವ ಸಂಪತ್ತು ಹಾಗೂ ಯುವಜನರ ಕ್ರಿಯಾಶೀಲತೆಯನ್ನು ಬಳಸಿಕೊಂಡು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕಾಗಿದೆ. ನಮ್ಮದೇ ಜನ ಬೆಳೆಯಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.
ಈ ಕುರಿತು ಕರಾವಳಿ ಭಾಗದ ಎಲ್ಲ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಅವರೂ ಈ ಯೋಜನೆಗೆ ಆಸಕ್ತಿ ತೋರಿದ್ದಾರೆ. ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಪ್ರವಾಸೋದ್ಯಮ ನೀತಿ ಕುರಿತು ಚರ್ಚೆ ನಡೆದಾಗ, ಇಂತಹ ಸಾಮಾನ್ಯ ನೀತಿ ಕರಾವಳಿ ಅಭಿವೃದ್ಧಿಗೆ ಸೂಕ್ತವಲ್ಲ ಎಂದು ಮುಖ್ಯ ಕಾರ್ಯದರ್ಶಿಗೆ ತಿಳಿಸಿದ್ದೇನೆ. ಈ ವಿಷಯವನ್ನು ವಿಧಾನಸಭೆಯಲ್ಲೂ ಚರ್ಚಿಸಲಾಗಿದೆ. ಕರಾವಳಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ ಎಂದು ಹೇಳಿದರು.
ವಿದೇಶಗಳಲ್ಲಿ, ವಿಶೇಷವಾಗಿ ಕೊಲ್ಲಿ ರಾಷ್ಟ್ರಗಳಲ್ಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ನೆಲೆಸಿರುವ ಈ ಭಾಗದ ಅನೇಕ ಉದ್ಯಮಿಗಳು ಸರ್ಕಾರ ಸಹಕಾರ ನೀಡಿದರೆ ಹೂಡಿಕೆಗೆ ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ. ಇಲ್ಲಿನ ಯುವಜನರು ಉತ್ತಮ ಸಾಮರ್ಥ್ಯ ಹೊಂದಿದ್ದು, ವಿದೇಶಗಳಲ್ಲಿ ಸಾಧನೆ ಮಾಡಿದ್ದಾರೆ. ತಮ್ಮ ಊರು ಮತ್ತು ಜನ್ಮಭೂಮಿಯ ಅಭಿವೃದ್ಧಿಗೆ ಕೈಜೋಡಿಸಲು ಅವರು ಆಸಕ್ತರಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವುದು ಅಗತ್ಯವಾಗಿದ್ದು, ಅದನ್ನು ಕೆಲವೇ ಅಧಿಕಾರಿಗಳು ಸೇರಿ ರೂಪಿಸಿದರೆ ಸಾಲದು. ಈ ಹಿನ್ನೆಲೆಯಲ್ಲಿ ಇಂದು ಈ ಭಾಗದ ಜನರ ಸಭೆ ಕರೆಯಲಾಗಿದೆ. ಯೋಜನೆಗೆ ಎದುರಾಗುವ ಅಡಚಣೆಗಳು ಏನು, ಸರ್ಕಾರ ಯಾವ ರೀತಿಯ ಸಹಾಯ ಮಾಡಬಹುದು ಎಂಬುದರ ಕುರಿತು ಚರ್ಚಿಸಲಾಗುವುದು. ಸರ್ಕಾರ ಮೂಲಸೌಕರ್ಯ ಒದಗಿಸಲಿದೆ; ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಅಗತ್ಯವಿದ್ದು, ಖಾಸಗಿ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದರು.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಜನಪ್ರತಿನಿಧಿಗಳು, ಉದ್ಯಮಿಗಳು ಮತ್ತು ಹೂಡಿಕೆದಾರರ ಆಲೋಚನೆಗಳನ್ನು ತಿಳಿದುಕೊಳ್ಳಬೇಕಿದೆ. ಕಾನೂನುಬದ್ಧವಾಗಿ ಯಾವ ಅವಕಾಶಗಳಿವೆ ಎಂಬುದನ್ನೂ ಚರ್ಚಿಸಲಾಗುವುದು. ಅದಕ್ಕಾಗಿ ಕರಾವಳಿ ರಕ್ಷಣಾ ವಲಯ ಪ್ರಾಧಿಕಾರ, ರಕ್ಷಣಾ ಇಲಾಖೆ ಸೇರಿದಂತೆ ಸಂಬಂಧಿತ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ನೀತಿ ನಿಯಮಗಳಲ್ಲಿ ಯಾವ ಬದಲಾವಣೆಗಳನ್ನು ಮಾಡಬಹುದು ಎಂಬ ಬಗ್ಗೆ ಸಾರ್ವಜನಿಕ ಚರ್ಚೆ ನಡೆಸಿ, ಸಮಾಲೋಚನೆಯ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.ಇದನ್ನು ಓದಿ –ಚಾಮರಾಜನಗರದಲ್ಲಿ ತಾಯಿ ಹುಲಿ ಸೆರೆ
ಪರಿಶಿಷ್ಟ ಜಾತಿಯವರ ಒಳಮೀಸಲಾತಿ ಮಸೂದೆ, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಮಸೂದೆ ಹಾಗೂ ದ್ವೇಷ ಭಾಷಣ ತಡೆ ಮಸೂದೆಗಳಿಗೆ ಇನ್ನೂ ರಾಜ್ಯಪಾಲರ ಅಂಗೀಕಾರ ಸಿಗದಿರುವ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದರು.








