ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ತೆರೆ ಎಳೆಯುವಂತೆ ಗೃಹಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, 2023ರಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಎಂದು ಘೋಷಿಸಿದ್ದು, ಅದರ ಅವಧಿ 2028ರವರೆಗೆ ಇದೆ. ಹೀಗಾಗಿ ಪ್ರತ್ಯೇಕವಾಗಿ “ಐದು ವರ್ಷ ಸಿಎಂ” ಎಂದು ಹೈಕಮಾಂಡ್ ಮತ್ತೆ ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದರು.
2013ರಲ್ಲಿ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿರಲಿಲ್ಲ. ಆದರೂ ಅವರು ಪೂರ್ಣಾವಧಿ ಮುಖ್ಯಮಂತ್ರಿ ಆಗಿದ್ದರು. ಈ ಬಾರಿಯೂ ಅವರು ಸಂಪೂರ್ಣ ಅವಧಿ ಮುಗಿಸಬೇಕು ಎಂಬುದೇ ಉದ್ದೇಶ ಎಂದು ಹೇಳಿದರು.
ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಅಥವಾ ನಿರ್ಧಾರ ಹೈಕಮಾಂಡ್ ಮಟ್ಟದಲ್ಲೇ ಆಗಬೇಕು. ಅಲ್ಲಿಯವರೆಗೆ ಯಾರೇ ಏನೇ ಹೇಳಿದರೂ ಅದು ವೈಯಕ್ತಿಕ ಅಭಿಪ್ರಾಯ ಮಾತ್ರ ಎಂದು ಪರಮೇಶ್ವರ್ ಹೇಳಿದರು. ಹೈಕಮಾಂಡ್ ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸಿಲ್ಲ ಎಂದು ಕೂಡ ಅವರು ಸ್ಪಷ್ಟಪಡಿಸಿದರು.
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರೂ ಆಗಿದ್ದು, ಡಿಸಿಎಂ ಆಗಿದ್ದಾರೆ. ಅವರು ನಮ್ಮ ನಾಯಕರಾಗಿದ್ದು, ಅವರಿಗೆ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ ಶಾಸಕರು ಸಿಎಂ ಹುದ್ದೆಗೆ ಅರ್ಹರು ಎಂದು ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲೇ ಹೇಳಿದ್ದಾರೆ. ಹೀಗಾಗಿ “ಯಾರು ಅರ್ಹರು?” ಎಂಬ ಪ್ರಶ್ನೆ ಅರ್ಥವಿಲ್ಲ ಎಂದು ಹೇಳಿದರು.
ಉಪಚುನಾವಣೆ ಫಲಿತಾಂಶಕ್ಕೂ ಸರ್ಕಾರದ ಸ್ಥಿತಿಗೂ ಯಾವುದೇ ಸಂಬಂಧ ಇಲ್ಲ. ಉಪಚುನಾವಣೆ ಫಲಿತಾಂಶ ಸರ್ಕಾರಕ್ಕೆ ನೀಡುವ ಅಂಕಗಳಲ್ಲ. ಅದರ ಆಧಾರದ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರದ ಆಡಳಿತ ದಕ್ಷತೆಗೆ ಜನ ಬೆಂಬಲ ನೀಡುತ್ತಾರೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.








