ಬೆಂಗಳೂರು: ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಮನೆ ಮನೆ ಪರಿಶೀಲನೆಗೆ ನೀಡಲಾಗಿದ್ದ ಗಡುವನ್ನು ಚುನಾವಣಾ ಆಯೋಗ ಆಗಸ್ಟ್ 17ರವರೆಗೆ ವಿಸ್ತರಿಸಿದೆ. ಈ ಹಿಂದೆ ಆಗಸ್ಟ್ 8ರವರೆಗೆ ಮನೆ ಮನೆ ಪರಿಶೀಲನೆಗೆ ಗಡುವು ನೀಡಲಾಗಿತ್ತು.
ಈ ನಡುವೆ ಬೆಂಗಳೂರಿನಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಮಹತ್ವದ ಮಾಹಿತಿ ಹೊರಬಿದ್ದಿದೆ. ನಗರದಲ್ಲಿ ಸುಮಾರು 49 ಲಕ್ಷ ಮತದಾರರನ್ನು ಪರಿಶೀಲನೆಗೆ ಒಳಪಡಿಸುವ ಸಾಧ್ಯತೆ ಇದ್ದು, ಈ ಪೈಕಿ ಮೃತರಾದವರು, ಸ್ಥಳಾಂತರಗೊಂಡವರು, ಈಗಾಗಲೇ ಬೇರೆಡೆ ನೋಂದಣಿಯಾಗಿರುವವರು ಹಾಗೂ ಶಾಶ್ವತವಾಗಿ ಬೇರೆ ಪ್ರದೇಶಗಳಿಗೆ ತೆರಳಿರುವವರ ವಿವರಗಳನ್ನು ಪರಿಶೀಲಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ಒಟ್ಟು ಸುಮಾರು 1.3 ಕೋಟಿ ಮತದಾರರಿದ್ದು, ಅವರ ಪೈಕಿ ಸುಮಾರು 49 ಲಕ್ಷ ಮಂದಿಯ ಹೆಸರುಗಳು ವಿವಿಧ ಕಾರಣಗಳಿಂದ ಪರಿಶೀಲನಾ ಪಟ್ಟಿಯಲ್ಲಿ ಗುರುತಿಸಲ್ಪಟ್ಟಿವೆ ಎನ್ನಲಾಗಿದೆ. ಆದರೆ ಪರಿಶೀಲನೆ ಪೂರ್ಣಗೊಂಡ ಬಳಿಕವೇ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ADSSO ಎಂದು ಗುರುತಿಸಲಾಗಿರುವ ಪ್ರಕರಣಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಅಗತ್ಯ ದಾಖಲೆಗಳು ಹಾಗೂ ಸ್ಥಳೀಯ ಪರಿಶೀಲನೆಯ ಮೂಲಕ ದೃಢಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಅರ್ಹ ಮತದಾರರ ಹೆಸರು ತಪ್ಪಾಗಿ ಪಟ್ಟಿಯಿಂದ ಕೈಬೀಳದಂತೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಶಿಕ್ಷಣ, ಉದ್ಯೋಗ ಹಾಗೂ ಇತರ ಕಾರಣಗಳಿಂದ ನಗರಕ್ಕೆ ಬಂದಿದ್ದ ಹಲವರು ಬಳಿಕ ತಮ್ಮ ಮೂಲ ಸ್ಥಳಗಳಿಗೆ ಅಥವಾ ಬೇರೆ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ. ವಿದ್ಯಾರ್ಥಿಗಳು, ಸೈನಿಕರು ಹಾಗೂ ಉದ್ಯೋಗಕ್ಕಾಗಿ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬಂದವರಲ್ಲಿಯೂ ಸ್ಥಳಾಂತರಗೊಂಡವರ ಸಂಖ್ಯೆ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಹೆಸರುಗಳು ಹಾಗೂ ವಿಳಾಸಗಳ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸಲಾಗುತ್ತಿದೆ. ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಅಂತಿಮ ಮತದಾರರ ಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ ರಾವ್ ತಿಳಿಸಿದ್ದಾರೆ.








