ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿದ್ದು, ಏಪ್ರಿಲ್ 2ರವರೆಗೆ ನಡೆಯಲಿವೆ. ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.
ಇವರಲ್ಲಿ 4,44,172 ಬಾಲಕರು ಮತ್ತು 4,21,816 ಬಾಲಕಿಯರು ಇದ್ದು, ರಾಜ್ಯದ 2,871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪ್ರಥಮ ಭಾಷಾ ವಿಷಯದಿಂದ ಪರೀಕ್ಷೆಗಳು ಆರಂಭವಾಗುತ್ತಿದ್ದು, ಕನ್ನಡ, ತೆಲುಗು, ತಮಿಳು, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳು ಒಳಗೊಂಡಿವೆ.
ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಡ್ರೆಸ್ ಕೋಡ್ ಪಾಲಿಸಬೇಕು ಹಾಗೂ ಅರ್ಧ ಗಂಟೆ ಮುಂಚಿತವಾಗಿ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸೂಚಿಸಿದೆ.
ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ತೋರಿಸಿ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಪಾರದರ್ಶಕತೆಗೆ ಹಲವೆಡೆ ವೆಬ್ಸ್ಟ್ರೀಮಿಂಗ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳು ಮೇಲ್ವಿಚಾರಣೆ ನಡೆಸಲಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಕೇಂದ್ರ ಮುಖ್ಯಾಧಿಕಾರಿಯೊಬ್ಬರಿಗೆ ಮಾತ್ರ ಕ್ಯಾಮೆರಾ ಇಲ್ಲದ ಸರಳ ಮೊಬೈಲ್ ಬಳಸಲು ಅವಕಾಶ ಇದೆ.ಇದನ್ನು ಓದಿ –ಕಪ್ಪು ನೋಟು’ ವಂಚನೆ ಜಾಲ ಪತ್ತೆ : 8 ಮಂದಿ ಬಂಧನ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಕರೆ ನೀಡಿದ್ದಾರೆ.








