ಬೆಂಗಳೂರು: ನಗರದಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗಾಳಿಯ ಗುಣಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿಯುತ್ತಿದೆ. ಬೆಂಗಳೂರು “ಗ್ಯಾಸ್ ಚೇಂಬರ್” ಆಗದಂತೆ ತಡೆಗಟ್ಟಲು ನಗರದ ಎಲ್ಲಾ 28 ಶಾಸಕರೊಂದಿಗೆ ಶೀಘ್ರ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ಅವರ ಮನವಿಯ ಮೇರೆಗೆ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಸಚಿವರು ಮಾತನಾಡಿದರು. ನಗರದಲ್ಲಿ ವಾಯು, ಜಲ ಹಾಗೂ ಶಬ್ದ ಮಾಲಿನ್ಯ ಹೆಚ್ಚುತ್ತಿರುವುದು ಗಂಭೀರ ವಿಷಯ. ಸಮಸ್ಯೆ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರ ಅಗತ್ಯವೆಂದು ಹೇಳಿದರು.
ರಸ್ತೆ ಧೂಳು ವಾಯು ಗುಣಮಟ್ಟ ಹದಗೆಡಲು ಪ್ರಮುಖ ಕಾರಣವಾಗಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಸುರೇಶ್ ಕುಮಾರ್ ಗಮನಸೆಳೆದರು. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.
ನಗರದಲ್ಲಿ 11 ಸ್ಥಿರ ಹಾಗೂ 13 ಸಂಚಾರಿ ಘಟಕಗಳ ಮೂಲಕ ವಾಯು ಗುಣಮಟ್ಟದ ಮೇಲ್ವಿಚಾರಣೆ ನಡೆಯುತ್ತಿದೆ. ಏರ್ ಕ್ವಾಲಿಟಿ ಇಂಡೆಕ್ಸ್ (AQI) 100 ಮೀರಿದಲ್ಲಿ ಸಂಬಂಧಿತ ಸ್ಥಳೀಯ ಸಂಸ್ಥೆಗೆ ನೋಟಿಸ್ ನೀಡಬೇಕು. ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ಕಾನೂನು ಕ್ರಮ ಜರುಗಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ಶೀಘ್ರದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಉದ್ಯಾನ ನಗರಿ ಎಂಬ ಹೆಗ್ಗಳಿಕೆ ಹೊಂದಿದ್ದ ಬೆಂಗಳೂರಿನಲ್ಲಿ ತಾಪಮಾನ ಏರಿಕೆಗೆ ಹವಾಮಾನ ಬದಲಾವಣೆ ಹಾಗೂ ಹಸಿರು ಹೊದಿಕೆ ಕುಸಿತ ಕಾರಣವಾಗಿದೆ. ಹಸಿರು ವಿಸ್ತರಣೆಗೆ ಕ್ರಮ ಕೈಗೊಂಡು ವಾಯು ಗುಣಮಟ್ಟ ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ನಗರದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕಾಗಿ ಸ್ಥಳೀಯ ಸಂಸ್ಥೆಗಳು ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ದಳ ರಚಿಸಲು ಸೂಚಿಸಲಾಗಿದೆ. ರಾಜ್ಯದ ತ್ಯಾಜ್ಯ ಶುದ್ಧೀಕರಣ ಘಟಕಗಳ ಸಾಮರ್ಥ್ಯ, ಕಾರ್ಯಕ್ಷಮತೆ ಹಾಗೂ ಸಂಸ್ಕರಿಸದೆ ಜಲಮೂಲಗಳಿಗೆ ಸೇರುತ್ತಿರುವ ಮಲಿನ ನೀರಿನ ವಿವರಗಳನ್ನು ಪರಿಶೀಲಿಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸಲು ಪರಿಸರ ಇಲಾಖೆಗೆ ನಿರ್ದೇಶನ ನೀಡಲಾಗಿದೆ.
ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್ ಹಾಗೂ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.








