ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಪರ್ವತಸಮಾನ ದಿಗ್ಗಜ, ಸರಸ್ವತಿ ಸನ್ಮಾನ್ ಪ್ರಶಸ್ತಿ ಪುರಸ್ಕೃತ, ಜನಮನಗಳಲ್ಲಿ ಶಾಶ್ವತ ಸ್ಥಾನ ಪಡೆದ ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ (94) ಅವರು ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಮಧ್ಯಾಹ್ನ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕಾದಂಬರಿಗಳ ಮೂಲಕ ಕನ್ನಡದ ಹೆಮ್ಮೆಯನ್ನು ವಿಶ್ವಮಟ್ಟಕ್ಕೇರಿಸಿದ ಭೈರಪ್ಪನವರ ಕೃತಿಗಳು ಇಂದಿಗೂ ಅಚ್ಚಳಿಯದೆ ಉಳಿದಿವೆ.
ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆ
ಇಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಮೈಸೂರಿಗೆ ಕೊಂಡೊಯ್ಯಲಾಗುವುದು. ಮಧ್ಯಾಹ್ನ 3ಕ್ಕೆ ಪಾರ್ಥೀವ ಶರೀರ ಮೈಸೂರು ತಲುಪಲಿದ್ದು, ಸಂಜೆ 6 ಗಂಟೆಯವರೆಗೆ ಕಲಾಮಂದಿರದ ಮುಂಭಾಗದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ನಂತರ ಶರೀರವನ್ನು ಕೋಲ್ಡ್ ಸ್ಟೋರೆಜ್ನಲ್ಲಿ ಇಡಲಾಗುತ್ತದೆ.
ಸೆಪ್ಟೆಂಬರ್ 26ರಂದು ಶುಕ್ರವಾರ ಬೆಳಗ್ಗೆ ಮೈಸೂರಿನ ಕುವೆಂಪುನಗರದಲ್ಲಿರುವ ಭೈರಪ್ಪನವರ ನಿವಾಸದಲ್ಲಿ ಪೂಜಾ ವಿಧಿವಿಧಾನಗಳು ನಡೆಯಲಿದ್ದು, ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ಸದ್ಯ ಅವರ ಪುತ್ರ ರವಿಶಂಕರ್ ಲಂಡನ್ನಿಂದ ಆಗಮಿಸುತ್ತಿದ್ದಾರೆ.
ಕನ್ನಡ ಸಾಹಿತ್ಯ ಲೋಕಕ್ಕೆ ಅಳಿಯದ ಕೊಡುಗೆ
ಭೈರಪ್ಪನವರ ಕೃತಿಗಳು ಕೇವಲ ಕಾದಂಬರಿಗಳಷ್ಟೇ ಅಲ್ಲದೆ, ಚಿತ್ರರಂಗ ಹಾಗೂ ದೂರದರ್ಶನದ ಮೂಲಕವೂ ಜನಮನಗಳನ್ನು ತಟ್ಟಿವೆ. ‘ವಂಶವೃಕ್ಷ’ ಕಾದಂಬರಿಯ ಆಧಾರಿತ ಸಿನಿಮಾ 1971ರಲ್ಲಿ ತೆರೆಕಂಡು ಭಾರೀ ಯಶಸ್ಸು ಕಂಡಿತ್ತು. ಅದೇ ರೀತಿ ತಬ್ಬಲಿಯು ನೀನಾದೆ ಮಗನೆ, ಮತದಾನ, ನಾಯಿನೆರಳು ಕೃತಿಗಳು ಸಿನಿಮಾವಾಗಿದ್ದರೆ, ಗೃಹಭಂಗ ಮತ್ತು ದಾಟು ಕಾದಂಬರಿಗಳ ಆಧಾರದ ಮೇಲೆ ಟಿವಿ ಧಾರಾವಾಹಿಗಳು ನಿರ್ಮಾಣಗೊಂಡಿದ್ದವು.








