ಮೈಸೂರು: ದೀರ್ಘಕಾಲದಿಂದ ನನೆಗುದಿಗೆ ಬಿದ್ದಿರುವ ಮೈಸೂರು–ಕುಶಾಲನಗರ ರೈಲ್ವೆ ಯೋಜನೆಗೆ ಮರು ಚಾಲನೆ ನೀಡಬೇಕು. ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಸಂಸದರು, ಮೈಸೂರು (ಬೆಳಗೊಳ)–ಕುಶಾಲನಗರ 89 ಕಿ.ಮೀ ಉದ್ದದ ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷೆ ಪೂರ್ಣಗೊಂಡಿದ್ದರೂ ಯೋಜನೆ ಮುಂದುವರಿಯದೆ ಸ್ಥಗಿತಗೊಂಡಿದೆ ಎಂದು ತಿಳಿಸಿದ್ದಾರೆ. ಅಗತ್ಯ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೂ ಕಾರ್ಯಗತಗೊಳಿಸುವ ಹಂತಕ್ಕೆ ತಲುಪದಿರುವುದು ಜನರಲ್ಲಿ ನಿರಾಶೆ ಉಂಟುಮಾಡಿದೆ. ಈ ಯೋಜನೆಗೆ ಪುನರುಜ್ಜೀವನ ನೀಡಲು ರೈಲ್ವೆ ಸಚಿವಾಲಯ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕೊಡಗು ಜಿಲ್ಲೆಗೆ ಇಂದಿಗೂ ನೇರ ರೈಲು ಸಂಪರ್ಕವಿಲ್ಲ. ಪ್ರವಾಸೋದ್ಯಮ, ಕಾಫಿ ತೋಟಗಾರಿಕೆ ಹಾಗೂ ಕೃಷಿ ಆಧಾರಿತ ಆರ್ಥಿಕತೆಯು ಸಂಪೂರ್ಣವಾಗಿ ರಸ್ತೆ ಸಾರಿಗೆಯ ಮೇಲೆ ಅವಲಂಬಿತವಾಗಿದೆ. ಮಳೆಗಾಲದಲ್ಲಿ ಭೂಕುಸಿತ, ರಸ್ತೆ ದುರಸ್ತಿ ಸಮಸ್ಯೆಗಳು ಹಾಗೂ ವಾಹನ ದಟ್ಟಣೆ ರೈತರು ಮತ್ತು ವ್ಯಾಪಾರಿಗಳಿಗೆ ಭಾರೀ ತೊಂದರೆ ಉಂಟುಮಾಡುತ್ತಿದೆ ಎಂದು ಯದುವೀರ್ ತಿಳಿಸಿದ್ದಾರೆ.
ರೈಲು ಮಾರ್ಗ ಆರಂಭವಾದರೆ ಮೈಸೂರು, ಕೊಡಗು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ಸಿಗಲಿದೆ. ಜೊತೆಗೆ, ಕಾಫಿ, ಮೆಣಸು, ಏಲಕ್ಕಿ ಸೇರಿದಂತೆ ಕೃಷಿ ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಸಾಗಿಸಲು ಸಾಧ್ಯವಾಗಲಿದೆ. ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳೂ ಹೆಚ್ಚಾಗಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಯೋಜನೆ ರಾಜ್ಯದ ಒಳನಾಡು ಸಂಪರ್ಕವನ್ನು ಬಲಪಡಿಸುವ ಮಹತ್ವದ ಮೂಲಸೌಕರ್ಯವಾಗಿದ್ದು, ದಕ್ಷಿಣ ಕರ್ನಾಟಕದ ಅಭಿವೃದ್ಧಿಗೆ ದಿಕ್ಕು ತೋರಿಸಲಿದೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿ, ಬಜೆಟ್ ಅನುದಾನವನ್ನು ಮೀಸಲಿಟ್ಟು ಯೋಜನೆಯನ್ನು ಶೀಘ್ರ ಜಾರಿಗೆ ತರಬೇಕು ಎಂದು ಸಂಸದರು ಕೇಂದ್ರ ಸಚಿವರನ್ನು ಆಗ್ರಹಿಸಿದ್ದಾರೆ.
ಸ್ಥಳೀಯ ಜನಪ್ರತಿನಿಧಿಗಳು, ವ್ಯಾಪಾರಿಗಳು ಮತ್ತು ರೈತ ಸಂಘಟನೆಗಳೂ ಈ ಯೋಜನೆಗೆ ತ್ವರಿತ ಅನುಮೋದನೆ ನೀಡಿ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿದ್ದು, ಕೇಂದ್ರ ಸರ್ಕಾರದ ಪ್ರತಿಕ್ರಿಯೆಗಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.








