ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮ್ಯಾಲೆ ಮುಂದುವರೆದಿದ್ದು, ರಾಜಧಾನಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ,
ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದಾದ್ಯಂತ ಆರು ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಮತ್ತು ಒಳನಾಡಿನಲ್ಲಿ ಮಳೆ ಭೀತಿ:
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕೂಡ ಮಳೆಯ ಸಾಧ್ಯತೆ ಇದೆ. ಬಂಗಾಳ ಉಪಸಾಗರದ ಒರಿಸ್ಸಾ ಕರಾವಳಿಯಲ್ಲಿ ಚಂಡಮಾರುತದಿಂದಾಗಿ ಸೆಪ್ಟೆಂಬರ್ 2ರಂದು ವಾಯುಭಾರ ಕುಸಿತ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 6ರವರೆಗೆ ವ್ಯಾಪಕ ಮಳೆಯಾಗಲಿದೆ.
ಇದೇ ಅವಧಿಯಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯೊಂದಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಸೆಪ್ಟೆಂಬರ್ 2ರಂದು ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಮಳೆ ತೀವ್ರತೆ:
ಇಂದಿನಿಂದ ಸೆಪ್ಟೆಂಬರ್ 4ರವರೆಗೆ ಬೆಂಗಳೂರಿನಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಸೋಮವಾರ ಸಂಜೆ ಟೌನ್ಹಾಲ್, ಕಾರ್ಪೋರೇಷನ್, ಜಯನಗರ, ಜೆಪಿ ನಗರ, ವಿಲ್ಸನ್ ಗಾರ್ಡನ್, ಶಾಂತಿನಗರ, ಲಾಲ್ ಬಾಗ್ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.ಇದನ್ನು ಓದಿ –ಮೈಸೂರಿಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಿಎಂ ಹಾಗೂ ರಾಜ್ಯಪಾಲರಿಂದ ಭವ್ಯ ಸ್ವಾಗತ
ಮಳೆಯ ಪರಿಣಾಮ ಮಲ್ಲೇಶ್ವರಂ ರಸ್ತೆಗಳಲ್ಲಿ ನೀರು ತುಂಬಿ ನದಿಯಂತಾಗಿದ್ದು, ಮಂತ್ರಿ ಮಾಲ್ ಹಾಗೂ ಬಿಬಿಎಂಪಿ ಕಚೇರಿ ಮುಂದೆ 2–3 ಅಡಿ ಮಳೆ ನೀರು ನಿಂತಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಆರ್ ಮಾರ್ಕೆಟ್ ರಸ್ತೆಯೂ ನೀರಿನಿಂದ ತುಂಬಿಕೊಂಡಿದೆ.








